ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ ಮೇ.17ರಂದು ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ 350 ನಿರ್ದೇಶಕರು
ಆಯ್ಕೆಯಾಗಿದ್ದಾರೆ. ಅವರೆಲ್ಲರೂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಲ್ಯಾಂಪ್ಸ್ ಸೊಸೈಟಿ, ಭೂ ಅಭಿವೃದ್ಧಿ ಬ್ಯಾಂಕ್,ಕೃಷಿಕ ಸಮಾಜದ ನಿರ್ದೇಶಕರುಗಳು ಭಾಗವಹಿಸಲಿದ್ದಾರೆ. ಪೂ.9.30ಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. 9.30ರಿಂದ 11 ಗಂಟೆಯ ತನಕ ಎರಡು ವಿಚಾರಗೋಷ್ಠಿಗಳು ನಡೆಯಲಿದೆ. ಸಹಕಾರಿ ಕ್ಷೇತ್ರದ ಕೆಲಸದ ಮೂಲಕ ರೈತರಿಗೆ ಸಹಾಯ ಮಾಡುವುದು, ಸಾಮಾಜಿಕ ಕ್ಷೇತ್ರದ ಸೇವಾ ಕಾರ್ಯಗಳ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಎಸ್.ಆರ್.ಸತೀಶ್ಚಂದ್ರ ವಿಚಾರ ಮಂಡಿಸಲಿದ್ದಾರೆ. 11ಗಂಟೆಗೆ

ಸಮಾರೋಪ ಸಮಾರಂಭ ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಬಳಿಕ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಗಳಾಗಿ ಸರಕಾರ ನಡೆಸಬೇಕೆಂದು ಭಾರತೀಯ ಜನತಾ ಪಾರ್ಟಿ ಜಯನಗರ ಬೂತ್ ಸಮಿತಿಯವರು ಸುಳ್ಯ ಜಯನಗರ ಕೊರಂಬಡ್ಕದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ
ಸಾನಿಧ್ಯದಲ್ಲಿ ಸಂಕಲ್ಪ ಮಾಡಿಕೊಂಡ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವೆ ಕಾರ್ಯಕ್ರಮದಲ್ಲಿ ಬಿ.ವೈ. ವಿಜಯೇಂದ್ರ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಸಿಎ ಬ್ಯಾಂಕ್ ಅಧ್ಯಕ್ಷ ಎ.ವಿ.ವಿಕ್ರಮ್ ಅಡ್ಪಂಗಾಯ, ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಉಪಸ್ಥಿತರಿದ್ದರು.