ಸುಳ್ಯ:ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ನಿರೀಕ್ಷೆಗೂ ಮೀರಿ ಅಭೂತ ಪೂರ್ವ ಯಶಸ್ಸು ಸಾಧಿಸುತ್ತಿದೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಚಾಲನೆ ನೀಡಿ ನಾಲ್ಕು ತಂಡಗಳಾಗಿ ನಡೆಯುತ್ತಿರುವ ಯಾತ್ರೆಗೆ ಜನರಿಂದ ಭಾರೀ ದೊಡ್ಡ ಬೆಂಬಲ ದೊರೆಯುತಿದೆ.
ಮಾ.11ರಂದು ಸುಳ್ಯ ಕ್ಷೇತ್ರಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದ್ದು
ಸುಳ್ಯದ ಜನರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಭಾಗವಹಿಸಿ ಬೆಂಬಲ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಯಲಿದೆ. ಬಿಜೆಪಿಯ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಯಶಸ್ವಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ ಅವರು ಮಾ.11ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನದ ವೇಳೆಗೆ ಸಂಪಾಜೆಗೆ ಆಗಮಿಸಲಿದೆ. ಜಿಲ್ಲಾ ಗಡಿಯಲ್ಲಿ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ಸಂಪಾಜೆ, ಅರಂತೋಡುಗಳಲ್ಲಿ ಯಾತ್ರೆ ಸಾಗಿ ಬಂದು ಸುಳ್ಯಕ್ಕೆ ಆಗಮಿಸಲಿದೆ. ಮಧ್ಯಾಹ್ನ 2.30ರ ಸುಮಾರಿಗೆ ಸುಳ್ಯದ ವಿಷ್ಣು ಸರ್ಕಲ್ ಬಳಿ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ವಿಷ್ಣು ಸರ್ಕಲ್ನಿಂದ ಜ್ಯೋತಿ ಸರ್ಕಲ್ ತನಕ ನಗರದಲ್ಲಿ ರೋಡ್ ಶೋ ನಡೆಯಲಿದ್ದು

ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಅಭೂತಪೂರ್ವವಾಗಿ ಸಾಗಿ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ,ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವರಾದ ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಸೇರಿ
ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರು, ಶಾಸಕರು, ಬಿಜೆಪಿ ರಾಜ್ಯ ನಾಯಕರು, ಜಿಲ್ಲಾ ನಾಯಕರು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅಂಗಾರ ತಿಳಿಸಿದ್ದಾರೆ. ಮಾ.11,12 ಮತ್ತು 13 ರಂದು 3 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಯಾತ್ರೆ ಪ್ರಯಾಣಿಸಲಿದೆ ಎಂದು ವಿವರಿಸಿದರು.
231 ಬೂತ್ಗಳಲ್ಲಿ ಸಭೆ-ಕಂಜಿಪಿಲಿ
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ ವಿಜಯ ಸಂಕಲ್ಪ ಯಾತ್ರೆಗೆ ಎಲ್ಲಾ ಸಿದ್ಧತೆಗಳನ್ನೂ ಮಾಡಲಾಗಿದೆ. ಯಾತ್ರೆಯ ಸಿದ್ಧತೆಗಾಗಿ ಪಕ್ಷದ ಪ್ರಮುಖರ ಗ್ರಾಮ ಮಟ್ಟದಲ್ಲಿ, ಬೂತ್ ಮಟ್ಟಕ್ಜೆ ತೆರಳಿ ಸಭೆಗಳನ್ನು ನಡೆಸಲಾಗಿದೆ. ಎಲ್ಲಾ 231 ಬೂತ್ಗಳಲ್ಲಿಯೂ ಸಭೆ ನಡೆಸಲಾಗಿದೆ. ಕಾರ್ಯಕರ್ತರು, ಅಭಿಮಾನಿಗಳು ಹಾಗು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಭಾಗೀರಥಿ ಮುರುಳ್ಯ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಯುವಮೋರ್ಚಾ ಗುರುದತ್ ನಾಯಕ್, ಯುವ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯತ್ ಅಧ್ಯಕ್ಷ ವಿಜಯಕುಮಾರ್ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.