ಸುಳ್ಯ:ಸುಳ್ಯ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನಾಗಪಟ್ಟಣದ ವೆಂಟೆಡ್ ಡ್ಯಾಂ ನಲ್ಲಿ ತೀವ್ರ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳವಾಗಿದ್ದು, ವೆಂಟೆಡ್ ಡ್ಯಾಂನ ಎಲ್ಲಾ ಷಟರ್ಗಳನ್ನು ಪೂರ್ಣ ಪ್ರಮಾಣದಲ್ಲಿ ಕೂಡಲೇ ತೆರವು ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು. ನದಿಯಲ್ಲಿ
ನೀರಿನ ಮಟ್ಟ ಹೆಚ್ಚಳವಾಗಿದ್ದು ಷಟರ್ ತೆಗೆಯದೆ ಇರುವುದು ಪರಿಸರದ ನಿವಾಸಿಗಳಿಗೆ ಆತಂಕಕ್ಕೆ ಕಾರಣವಾಗಿದೆ.ಆದುದರಿಂದ ಶೀಘ್ರ ವೆಂಟೆಡ್ ಡ್ಯಾಂನ ಎಲ್ಲಾ ಗೇಟ್ ಗಳನ್ನು ತೆರೆಸುವಂತೆ ಆಗ್ರಹಿಸಿದರು. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ ತಹಶೀಲ್ದಾರ್ ಸಂಜೆಯೊಳಗಾಗಿ ವೆಂಟೆಡ್ ಡ್ಯಾಂನ ಗೇಟ್ ತೆರವುಗೊಳಿಸಿ ವರದಿ ನೀಡುವಂತೆ ಸೂಚಿಸಿದರು.
ಸಣ್ಣ ನೀರಾವರಿ ಇಲಾಖೆಯ ತಾಂತ್ರಿಕ ತಂಡವನ್ನು ಇಂದು ಸಂಜೆ ಕಳುಹಿಸಿ ವೆಂಟೆಡ್ ಡ್ಯಾಮ್ ಎಲ್ಲಾ ಬಾಗಿಲುಗಳನ್ನು ತೆರೆದು ನದಿ ತೀರದ ನಿವಾಸಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳುವುದಾಗಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಹಶೀಲ್ದಾರ್ ಅವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಅರೋಗ್ಯ ರಕ್ಷಾ ಸಮಿತಿ ಸದಸ್ಯ ರಾಧಾಕೃಷ್ಣ ಪರಿವಾರಕಾನ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.