ಸುಬ್ರಹ್ಮಣ್ಯ: ಭವಿಷ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿ ಶ್ರೇಷ್ಠತೆಯನ್ನು ಸಾಧಿಸಲು ಸ್ಪರ್ಧಾತ್ಮಕ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಾವುದೇ ಸರಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಗಳಿಗೆ ಕನ್ನಡ ಭಾಷಾ ಜ್ಞಾನವು ಅತ್ಯವಶ್ಯಕ ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮತ್ತು ಎಸ್ ಎಸ್ ಪಿ ಯು ಕಾಲೇಜಿನ
ಕಾರ್ಯದರ್ಶಿ ಡಾ.ನಿಂಗಯ್ಯ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ಎಸ್ಪಿಯು ಕಾಲೇಜಿನಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅವರು ಕನ್ನಡ ವ್ಯಾಕರಣದ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠ ಹೇಳಿದರು. ಕನ್ನಡ ಭಾಷೆ ಮತ್ತು ಕನ್ನಡ ವ್ಯಾಕರಣಗಳ ಆಳವಾದ ಜ್ಞಾನವನ್ನು ಮೈಗೂಡಿಸಿಕೊಳ್ಳುವುದು, ಕನ್ನಡ ವ್ಯಾಕರಣ ಛಂದಸ್ಸು ಇತ್ಯಾದಿಗಳ ಆಳವಾದ ಅಧ್ಯಯನವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ನುಡಿದರು. ಕನ್ನಡ ವ್ಯಾಕರಣ, ಸಮಾಸ, ಸಂಧಿ ಇತ್ಯಾದಿಗಳನ್ನು ಸುಲಭವಾಗಿ ಅರ್ಥೈಯಿಸಿಕೊಳ್ಳುವ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮತ್ತು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.