ಮಡಿಕೇರಿ:ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ ಮುಂಜಾಗೃತಾ ಕ್ರಮವಾಗಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ
ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಸಿದ್ಧವಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ ಎಂದರು.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ
ಕಳೆದ ಎರಡು ವರ್ಷಗಳಿಂದ ಕೊರೊನಾ ಪರಿಸ್ಥಿತಿಯಿಂದ ಹೊರಬಂದಿರುವ ಜನರಿಗೆ ಮತ್ತೆ ಕೋವಿಡ್ 19 ಆತಂಕ ಎದುರಾಗಿದೆ. ಈ ಕುರಿತಾಗಿ ಸರ್ಕಾರ ಕೆಲವು ಜಾಗೃತಿ ನಿಯಮಗಳನ್ನು ಅನುಸರಿಸುವಂತೆ ತಿಳಿಸಿದೆ. ಕೇರಳದಲ್ಲಿ ಕೊರೋನಾದ ರೂಪಾಂತರಿ ತಳಿ ಪತ್ತೆಯಾಗಿರುವ ಮತ್ತು ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾಗೃತಿ ವಹಿಸಲು ಸೂಚಿಸಲಾಗಿದೆ.














