ಮಂಗಳೂರು: ಮುಂಬರುವ ಲೋಕಸಭೆಯ ಚುನಾವಣೆಯ ವಿವಿಧ ಕಾರ್ಯಗಳಿಗೆ ನಿಯೋಜನೆಗೊಂಡ ಹಲವು ತಂಡಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮವಹಿಸಿ ತಮ್ಮ ಕರ್ತವ್ಯವನ್ನು ನಿಭಾಯಿಸಿದಲ್ಲಿ ಚುನಾವಣೆ ಸುಸೂತ್ರವಾಗಿ ಜರುಗಲಿದೆ. ಸಮಸ್ಯೆ ಬಂದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಆ ಬಗ್ಗೆ ಮೊದಲೇ ಜಾಗೃತರಾಗಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಹೇಳಿದರು.ಅವರು ನಗರದ
ಜಿಲ್ಲಾಧಿಕಾರಿಗಳ ಕಚೇರಿಗಳ ಸಭಾಂಗಣದಲ್ಲಿ ಮಾ.12ರಂದು ಮಂಗಳವಾರ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣಾ ಮತದಾನಕ್ಕೆ ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅಂದಾಜು 12 ಸಾವಿರ ಸಿಬ್ಬಂದಿಗಳ ಅಗತ್ಯವಿದೆ, ಆ ಸಂಖ್ಯೆಯಲ್ಲಿ ಕೊರತೆಯಾಗಿದ್ದರೆ ಎಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಲಭ್ಯವಿರುವ ಅಧಿಕಾರಿ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ಡ್ರಾ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಕೂಡಲೇ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ-ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ಮಾನವ ಸಂಪನ್ಮೂಲ ವಿಭಾಗದ ನೋಡಲ್ ಅಧಿಕಾರಿಗೆ ಸೂಚನೆ ನೀಡಿದರು. ಚುನಾವಣೆ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಜಿಲ್ಲೆಯ ಪ್ರಾದೇಶಿಕ ಸಾರಿಗೆ ವಿಭಾಗದ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ವಾಹನಗಳು, ವಿವಿಧ ನಿಗಮ ಹಾಗೂ ಮಂಡಳಿಗಳಲ್ಲಿರುವ ವಾಹನಗಳು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನಗಳು ಈ ಕಾರ್ಯಕ್ಕೆ ಬಳಸಿಕೊಳ್ಳುವಂತೆ ತಿಳಿಸಿದ ಅವರು, ಮಾದರಿ ನೀತಿ ಸಂಹಿತೆ ಜಾರಿಯಾದ ಕೂಡಲೇ ಚುನಾವಣಾ ಕರ್ತವ್ಯ ಆರಂಭವಾಗಲಿದ್ದು, ಸೆಕ್ಟರ್ ಅಧಿಕಾರಿಗಳಿಗೆ ವಾಹನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು ಎಂದವರು ಹೇಳಿದರು.
ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಅಚ್ಚಕಟ್ಟಾಗಿ ನಿರ್ವಹಿಸಬೇಕು. ಯಾವ ಕ್ಷಣದಲ್ಲಿಯಾದರೂ ಲೋಕಸಭೆಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿರುತ್ತವೆ. ಈ ಹಿಂದೆ ಚುನಾವಣಾ ಕರ್ತವ್ಯ ನಿಭಾಯಿಸಿದ ಅನುಭವ ತಮಗಿದೆ, ಅದರ ಆಧಾರದ ಮೇಲೆ ಚುನಾವಣಾ ಕರ್ತವ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕ ರೀತಿಯಲ್ಲಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ವಿವಿಧ ನೋಡಲ್ ಅಧಿಕಾರಿಗಳ ಕರ್ತವ್ಯಗಳು ಹಾಗೂ ಅವರ ತಂಡ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಸುಧೀರ್ಘವಾಗಿ ಸಭೆಯಲ್ಲಿ ಚರ್ಚೆ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಜಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.









