ಮಂಗಳೂರು:ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಇದುವರೆಗೆ ಕೇಂದ್ರ ಸ್ಥಾನ ಮೈಸೂರಿನಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಹೇಳಿದರು.ಅವರು ಜು.14ರ ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ
ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ಅನುವಾಗುವ ಪರಿ ನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದ್ದು, ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸುಗಳನ್ನು ನಡೆಸಲು ಪ್ರಾರಂಭಿಸಿದೆ ಎಂದರು.
ಹತ್ತಾರು ಶಿಕ್ಷಣ ಸಂಸ್ಥೆಗಳು ಸಂಗೀತ ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆಸಲು ಅರ್ಜಿಗಳನ್ನು ಸಲ್ಲಿಸಿದ್ದು 2023-24ನೇ ಶೈಕ್ಷಣಿಕ ಸಾಲಿನಿಂದಲೇ ಈ ಸಂಸ್ಥೆಗಳಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ಮಾಹಿತಿ ನೀಡಿದರು.
ಸರ್ಕಾರವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ನಡೆಸುತ್ತಿದ್ದ ಸಂಗೀತ ಪರೀಕ್ಷೆ ಹಾಗೂ ಪ್ರದರ್ಶಕ ಕಲೆಗಳ ನೃತ್ಯ ಮತ್ತು ತಾಳವಾದ್ಯಗಳಲ್ಲಿ ಜೂನಿಯರ್, ಸೀನಿಯರ್ ಮತ್ತು ವಿದ್ವತ್ ಪರೀಕ್ಷೆಗಳನ್ನು ನಡೆಸುವ ಮತ್ತು ಪ್ರಮಾಣ ಪತ್ರಗಳನ್ನು ನೀಡುವ ಸಂಪೂರ್ಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ವಹಿಸಿಕೊಟ್ಟಿದೆ. ಪಠ್ಯ ಕ್ರಮಗಳಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಜೊತೆಗೆ ಆಧುನಿಕ ತಾಂತ್ರಿಕತೆಯನ್ನು ಸದ್ಬಳಕೆ ಮಾಡಿಕೊಂಡು ಪಾರದರ್ಶಕತೆಯಿಂದ ಈ ಪರೀಕ್ಷೆಗಳನ್ನು ವಿಶ್ವವಿದ್ಯಾಲಯದಲ್ಲಿ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ ಎಂದ ಅವರು ಮೊದಲ ಪರೀಕ್ಷೆ ಬರುವ ನವೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.