ಸುಳ್ಯ:ಸುಳ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಹಿರಿಯ ಶಿಕ್ಷಕರ ಮತ್ತು ಶಿಕ್ಷಣ ಪ್ರೇಮಿಗಳ ಸಮಾವೇಶ ಮೇ 5ರಂದು ಸುಳ್ಯ ಅಮೃತ ಭವನದಲ್ಲಿ ನಡೆಯಿತು. ಸಮಾವೇಶದಲ್ಲಿ ಈ ಶಾಲೆಯಲ್ಲಿ ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಳೆ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದರು.ಸಮಾವೇಶದ ಅಧ್ಯಕ್ಷತೆಯನ್ನು
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಬಿ.ಸದಾಶಿವ ವಹಿಸಿದ್ದರು. ಸಮಿತಿಯ ಸಂಚಾಲಕ ಆರ್.ಕೆ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ‘112 ವರ್ಷಗಳ ಇತಿಹಾಸ ಇರುವ ಈ ಶಾಲೆಯನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಿ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಜವಾಬ್ದಾರಿ ಕೇವಲ ಇಲಾಖೆ ಮತ್ತು ಸರಕಾರದ ಜವಾಬ್ದಾರಿಯಷ್ಟೇ ಅಲ್ಲ. ಇಲ್ಲಿ ಓದಿ ಬೆಳೆದ ನಮ್ಮೆಲ್ಲರದ್ದೂ ಆಗಿರುತ್ತದೆ. ಈ ನಿಟ್ಟಿನಲ್ಲಿ ಈ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ತೊಟ್ಟಿದ್ದು ನೀಲ ನಕಾಶೆಗಳನ್ನು ತಯಾರಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಒಂದು ಸಂಸ್ಥೆಯನ್ನು ಭವ್ಯವಾಗಿ ನಿರ್ಮಿಸಲು ಈ ಶಾಲೆಯ ಎಲ್ಲಾ ಹಳೆ ವಿದ್ಯಾರ್ಥಿಗಳ ಸಹಕಾರವನ್ನು ಕೋರುತ್ತಿದ್ದೇವೆ ಎಂದು ಹೇಳಿದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕರುಗಳಾದ ಕಮಲಾಕ್ಷಿ ಟೀಚರ್, ಶಿವಶಂಕರ್ ಭಟ್, ಕೃಷ್ಣನಾವಡ, ಕೇಪಣ್ಣ ಎನ್ ಆರ್, ಕೆ ಸೋಮಯ್ಯ ಗೌಡ ಕುತ್ಪಾಜೆ, ಅಮೃತ ಭವನ ಸಮಿತಿ ಅಧ್ಯಕ್ಷ ಎನ್ ಜಯಪ್ರಕಾಶ್ ರೈ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರವಿರಾಜ್ ಕಮಿಲಡ್ಕ, ಹಿರಿಯ ವಿದ್ಯಾರ್ಥಿಗಳಾದ ವೆಂಕಟೇಶ್ ಪ್ರಭು, ಶ್ರೀನಾಥ್ ಅವಧೂತ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಹಿರಿಯ ಶಿಕ್ಷಕರನ್ನು ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ
ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯ ಶಿಕ್ಷಕಿ ಸುನಂದ ಸ್ವಾಗತಿಸಿ, ಕೆ ಗೋಕುಲ್ ದಾಸ್ ವಂದಿಸಿದರು. ಹಿರಿಯ ವಿದ್ಯಾರ್ಥಿ ಶಿವರಾಮ ಕೇವಳ ಕಾರ್ಯಕ್ರಮ ನಿರೂಪಿಸಿದರು.