ಮಂಗಳೂರು:ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.27ರಂದು ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.ಇದಕ್ಕೆ ಸಂಬಂಧಿಸಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ
ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆ ನಡೆಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಏರ್ಪಡಿಸಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು. ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಿಗೆ ಕ್ರೀಡಾ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ಕ್ರೀಡಾಂಗಣದ ಒಳಗೆ ಎಲ್ಲಾ ತಾಂತ್ರಿಕ ಅಂಶಗಳನ್ನು ಅಚ್ಚುಕಟ್ಟುಗೊಳಿಸಬೇಕು. ಕ್ರೀಡಾಪಟುಗಳು ಮತ್ತು ತೀರ್ಪುಗಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್, ಸ್ಮಾರ್ಟ್ಸಿಟಿ ಎಂ.ಡಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.















