ಮಂಗಳೂರು:ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ಅರಿವು ಮೂಡಿಸಲು ಕಲಾತಂಡಗಳು ಪ್ರದರ್ಶಿಸುವ ಕಲಾಪ್ರಕಾರಗಳು ಸಹಕಾರಿಯಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ. ಎ ಖಾದರ್ ಶಾ ಹೇಳಿದರು. ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಕ್ರಮಗಳ
ಕಲಾತಂಡಗಳ ಆಯ್ಕೆ ಪ್ರಕ್ರಿಯೆ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಜಾರಿಗೊಳಿಸಿದ ವಿವಿಧ ಯೋಜನೆಗಳ ಮಾಹಿತಿಯನ್ನು ಬೀದಿ ನಾಟಕ, ಜಾನಪದ ಸಂಗೀತ ಮೂಲಕ ಕಲಾತಂಡಗಳು ಪ್ರದರ್ಶಿಸಿ, ಜನರ ಮತ್ತು ಸರಕಾರದ ಯೋಜನೆಯನಡುವೆ ಸೇತುವೆಯಾಗಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು. ಜನರೊಂದಿಗೆ ಸಂವಹನ ಬೆಳೆಸುವ ಬೀದಿ ನಾಟಕದಂತಹ ಕಲಾಪ್ರಕಾರಗಳನ್ನು ಪ್ರಚಾರಕ್ಕೆ ಬಳಸಿಕೊಂಡರೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ.ಕೆ ಉಳೆಪಾಡಿ ಉಪಸ್ಥಿತರಿದ್ದರು. ಹಿರಿಯ ಕಲಾವಿದ ಗಿರೀಶ್ ನಾವಡ ನಿರೂಪಿಸಿದರು.





