*ವರದಿ:ರತ್ನಾಕರ ಸುಬ್ರಹ್ಮಣ್ಯ.
*ಚಿತ್ರ:ಪ್ರಕಾಶ್ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಗುರುವಾರ ಬೆಳಗ್ಗೆ ಪುಣ್ಯ ನದಿ ಕುಮಾರಾಧಾರಾದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು
ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಉತ್ಸವದ ವೈದಿಕ ವಿದಿ ವಿಧಾನಗಳಲ್ಲಿ ಸಹಕರಿಸಿದರು. ನೂರಾರು ಮಂದಿ ಭಕ್ತರು ಶ್ರೀ ದೇವರ ಅವಭೃತ ಸ್ನಾನದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಿ ಕೃತಾರ್ಥರಾದರು.
ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ನೆರವೇರಿತು. ನಂತರ ಶ್ರೀ ದೇವರ ಅವಭೃತೋತ್ಸವ ಸವಾರಿ ಶ್ರೀ ದೇವಳದಿಂದ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.
ನಂತರ ಕುಮಾರಧಾರ ನದಿಯಲ್ಲಿ ಶ್ರೀ ದೇವರ ನೌಕಾವಿಹಾರ ನಡೆಯಿತು.

ಅವಭೃತೋತ್ಸವ:
ತದನಂತರ ಕುಮಾರಧಾರೆಯ ಜಳಕದಗುಂಡಿಯಲ್ಲಿ ದೇವರ ಅವಭೃತೋತ್ಸವ ನಡೆಯಿತು. ಕ್ಷೇತ್ರ ಪುರೋಹಿತ ಮಧುಸೂಧನ ಕಲ್ಲೂರಾಯ ನೇತೃತ್ವದಲ್ಲಿ ಪುರೋಹಿತರು ಮಂತ್ರಘೋಷ ನೆರವೇರಿಸಿದರು. ಮಂತ್ರ ಘೋಷದ ನಡುವೆ ಪ್ರಧಾನ ಅರ್ಚಕರು ಕುಮಾರಧಾರ ಪುಣ್ಯ ತೀರ್ಥವನ್ನು ಶಂಖದಲ್ಲಿ ದೇವರಿಗೆ ಸಮರ್ಪಿಸಿದರು. ಬಳಿಕ ಸೀಯಾಭಿಷೇಕ ಅವಭೃತೋತ್ಸವದ ವಿವಿಧ ವೈಧಿಕ ವಿದಿವಿಧಾನಗಳನ್ನು ನಡೆಸಿದರು. ತದನಂತರ ಕುಮಾರಧಾರ ಪುಣ್ಯತೀರ್ಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಜಳಕ ನೆರವೇರಿತು. ಜಳಕದ ಬಳಿಕ ಕುಮಾರಧಾರ ನದಿ ತೀರದ ಅವಭೃತಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ,ಎಇಒ ಎಸ್.ಜೆ.ವೈ.ರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಅಜಿತ್ ಕುಮಾರ್, ಬ್ರಹ್ಮರಥ ದಾನಿ ಉದ್ಯಮಿ ಅಜಿತ್ ಶೆಟ್ಟಿ ಕಡಬ, ಗ್ಯಾರಂಟಿ ಅನುಷ್ಠಾನ ಯೋಜನೆಯ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಅಧೀಕ್ಷಕ ಕೆ.ಎಂ.ಗೋಪನಾಥ್ ನಂಬೀಶ, ಹೆಬ್ಬಾರ್ ಪ್ರಸನ್ನ ಭಟ್, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಶ್ರೀಮಂತ ಜೋಳದಪ್ಪಗೆ ಸೇರಿದಂತೆ ದೇವಳದ ಸಿಬ್ಬಂಧಿಗಳು, ಸಹಸ್ರಾರು ಭಕ್ತರು ಶ್ರೀ ದೇವರ ಪುಣ್ಯ ತೀರ್ಥದಲ್ಲಿ ದೇವರ ಜಳಕದ ಸಮಯ ಸ್ನಾನ ಮಾಡಿ ಕೃತಾರ್ಥರಾದರು.

ಯಶಸ್ವಿಯ ನೀರಾಟ:
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವದ ಸಂದರ್ಭದಲ್ಲಿ ಕ್ಷೇತ್ರದ ಆನೆ ಯಶಸ್ವಿಯು ಎಲ್ಲರಂತೆ ತಾನೂ ಕೂಡಾ ಸ್ನಾನ ಮಾಡಿ ನೀರಾಟವಾಡಿತು. ಶ್ರೀ ದೇವರ ಅವಭೃತದ ಸಮಯದಲ್ಲಿ ಶ್ರೀ ದೇವರೊಂದಿಗೆ ನೂರಾರು ಭಕ್ತರು ಪುಣ್ಯ ಸ್ನಾನ ನೆರವೇರಿಸಿದರು.
ನಂತರ ದೇವಳಕ್ಕೆ ಶ್ರೀ ದೇವರ ಸವಾರಿ ಹೊರಟಿತು. ಅಲ್ಲಲ್ಲಿ ಭಕ್ತಾಧಿಗಳು ಆರತಿ, ಹೂ, ಹಣ್ಣುಕಾಯಿ, ಕರ್ಪೂರಾರತಿಗಳನ್ನು ದೇವರಿಗೆ ಸಮರ್ಪಿಸಿದರು. ಅವಭೃತೋತ್ಸವ ಸವಾರಿ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಶ್ರೀ ದೇವಳದಲ್ಲಿ ಸಮಾಪನ ಪೂಜೆ ನಡೆಯಿತು. ಬಳಿಕ ಭಕ್ತಾಧಿಗಳಿಗೆ ವಸಂತಪೂಜೆಯ ಫಲಹಾರ ಪ್ರಸಾದ ಮತ್ತು ಶರಬತ್ತನ್ನು ವಿತರಿಸಲಾಯಿತು.

ಡಿ.2ರಂದು ನೀರಿನಲ್ಲಿ ಬಂಡಿ ಉತ್ಸವ:
ಡಿ.2ರಂದು ಮಾರ್ಗಶಿರ ಶುದ್ಧ ದ್ವಾದಶಿಯಂದು ಕೊಪ್ಪರಿಗೆ ಇಳಿಯುವುದರೊಂದಿಗೆ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಮುಕ್ತಾಯಗೊಳ್ಳಲಿದೆ. ಈ ದಿನ ರಾತ್ರಿ ದೇವಳದ ಹೊರಾಂಗಣದಲ್ಲಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದೆ.ಅಲ್ಲದೆ ಗೋಪುರ ನಡಾವಳಿ ನೆರವೇರಲಿದೆ.












