ರತ್ನಾಕರ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ:ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ ದೀಪಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಭಕ್ತಿ-ಸಡಗರದಿಂದ ನಡೆಯಿತು. ಚಂದ್ರಮಙಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.ಶ್ರೀ ದೇವಳದ ಅರ್ಚಕರು ಉತ್ಸವದ ವಿಧಿ ವಿಧಾನ
ನೆರವೇರಿಸಿದರು. ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗಿದ ಲಕ್ಷ ಹಣತೆ ದೀಪದ ನಡುವೆ ಶ್ರೀ ದೇವರ ಉತ್ಸವ ನೆರವೇರಿತು.
ದೇವಳದ, ಸಾರ್ವಜನಿಕ ಭಕ್ತರ, ಸಂಘ ಸಂಸ್ಥೆಗಳ ಸಹಕಾರದಿಂದ ಲಕ್ಷ ಹಣತೆಗಳು ಬೆಳಗಿತು. ಇದು ಶ್ರೀ ದೇವಳದ ಗೋಪುರದಿಂದ ಕಾಶಿಕಟ್ಟೆ ತನಕ, ಅಭಯ ಆಂಜನೇಯ ಗುಡಿ, ಸವಾರಿ ಮಂಟಪ, ಆದಿಸುಬ್ರಹ್ಮಣ್ಯ, ಬೈಪಾಸ್ ರಸ್ತೆ, ಕಾಶಿಕಟ್ಟೆ ಸುತ್ತಲಿನ ಆವರಣ, ಗ್ರಾ.ಪಂ., ಪೋಲೀಸ್ ಠಾಣೆ, ಕಾಶಿಕಟ್ಟೆಯಿಂದ ಅಡ್ಡಬೀದಿ ವೃತ್ತದ ತನಕ ರಸ್ತೆಯ ಇಕ್ಕೆಲದಲ್ಲಿ

ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಲ್ಲಿ ಕ್ಷೇತ್ರಾದ್ಯಂತ ಹಣತೆ ದೀಪ ಬೆಳಗಿತು. ಮಹಾಪೂಜೆಯ ಬಳಿಕ ಶ್ರೀ ದೇವರ ಹೊರಾಂಗಣ ಉತ್ಸವವು ಆರಂಭವಾಯಿತು. ಪ್ರಥಮವಾಗಿ ಕಾಚುಕುಜುಂಬ ದೈವವು ಶ್ರೀ ದೇವರನ್ನು ಭೇಟಿಯಾಗಿ ನುಡಿಗಟ್ಟು ನಡೆಯಿತು.ನಂತರ ಆಕರ್ಷಕ ಸಾಲುದೀಪಗಳ ನಡುವೆ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ಮತ್ತು ವಿವಿಧ ಸಂಗೀತ ವಾದ್ಯಗಳ ಸುತ್ತುಗಳು ನೆರವೇರಿತು. ಅಂತಿಮವಾಗಿ ಶ್ರೀ ದೇವರು ರಥಬೀದಿ ಪ್ರವೇಶಿಸಿದರು.
ಹೊರಾಂಗಣ ಉತ್ಸವದ ಬಳಿಕ ರಥಬೀದಿಗೆ ಆಗಮಿಸಿದ ಶ್ರೀ ದೇವರು ರಥದಲ್ಲಿ ಆರೂಢರಾಗಿ ಪೂಜೆ ಸ್ವೀಕರಿಸಿದರು. ಬಳಿಕ ಶ್ರೀ ದೇವಳದಿಂದ ಕಾಶಿಕಟ್ಟೆ ತನಕ ಉತ್ಸವ ನೆರವೇರಿತು. ಸಹಸ್ರಾರು ಭಕ್ತರು ಈ ಸಂದರ್ಭದಲ್ಲಿ ಶ್ರೀ ದೇವರ ದರುಶನ ಪಡೆದರು.













