ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ
ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ಆ.6ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಬೆ.9ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂಸದರು,ಶಾಸಕರು ಭಾಗವಹಿಸಲಿದ್ದಾರೆ ಎಂದು
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅವರಿಗೆ ಪ್ರದಾನ ಮಾಡಲಾಗುವುದು. ಸುವರ್ಣ ಸಂಭ್ರಮ ಸ್ಮರಣ ಸಂಚಿಕೆಯನ್ನು ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ಬಿಡುಗಡೆ ಗೊಳಿಸಲಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುವರ್ಣ ಸಂಭ್ರಮ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ.ಇದೇ ಸಂದರ್ಭದಲ್ಲಿ ಸುವರ್ಣ ಸಂಭ್ರಮ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಬಹು ಮಾನ ವಿತರಣೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್ .ಧರ್ಮ ನೆರವೇರಿಸಲಿದ್ದಾರೆ.
ಅಪರಾಹ್ನ 12 ಗಂಟೆಗೆ ಪ್ರಸ್ತುತ ಮಾಧ್ಯಮ ವಿಚಾರಗೋಷ್ಟಿ ನಡೆಯಲಿದೆ.ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ
ರವಿ ಹೆಗ್ಡೆ ಅಧ್ಯಕ್ಷತೆ ವಹಿಸುವರು.ವಿಜಯ ಕರ್ನಾಟಕ ಮಂಗಳೂರು ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಮತ್ತು ದಾಯ್ಜಿ ವರ್ಲ್ಡ್ ಪ್ರೈ.ಲಿಮಿಟೆಡ್ ನ ವ್ಯವಸ್ಥಾಪಕ ಸಂಪಾದಕ ವಾಲ್ಟರ್ ನಂದಳಿಕೆ ವಿಷಯ ಮಂಡನೆ ಮಾಡಲಿದ್ದಾರೆ.
ಮಧ್ಯಾಹ್ನ 3ರಿಂದ ಸಮಾರೋಪ ಸಮಾರಂಭ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ.ಕರ್ನಾಟಕ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸನ್ಮಾನಿಸುವರು.ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸಮಾರೋಪ ಭಾಷಣ ಮಾಡಲಿದ್ದಾರೆ.ಸಮಾರಂಭದಲ್ಲಿ ಮಾಜಿ ಸಚಿವರು ಶಾಸಕರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ,ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್,ರಾಜ್ಯ ಕಾರ್ಯ ಕಾರಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.





