ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ತನ್ನ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜ ಸೇವೆ, ಜನಪದ ಸಂಸ್ಕೃತಿ ಹಾಗೂ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ ಮೂವರು ಗಣ್ಯರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಗೌರವ ಡಾಕ್ಟರೇಟ್ಗೆ ಆಯ್ಕೆಯಾದವರಲ್ಲಿ ಹರೇಕಳ ಹಾಜಬ್ಬ, ಇತ್ತೀಚೆಗೆ
ನಿಧನರಾದ ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆ ಸೇರಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಈ ಗೌರವ ಪ್ರದಾನ ಮಾಡಲಾಗುತ್ತಿದೆ.ಇದಲ್ಲದೆ, ನಿಧನರಾದ ಗೋವಿಂದ ಭಟ್ ಅವರಿಗೆ ಏಪ್ರಿಲ್ 13ರಂದು ಅವರ ನಿವಾಸದಲ್ಲೇ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ತಿಳಿಸಲಾಗಿದೆ. ಉಳಿದ ಇಬ್ಬರಿಗೆ ಘಟಿಕೋತ್ಸವ ಸಮಾರಂಭದಲ್ಲೇ ಈ ಗೌರವ ನೀಡಲಾಗುತ್ತದೆ.ಘಟಿಕೋತ್ಸವವು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಈ ಬಾರಿ ಘಟಿಕೋತ್ಸವದಲ್ಲಿ 162 ಪಿಎಚ್ಡಿ ಪದವಿಗಳು, 56 ಚಿನ್ನದ ಪದಕಗಳು ಹಾಗೂ 57 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಗುತ್ತದೆ. ಒಟ್ಟು 147 ರ್ಯಾಂಕ್ಗಳು ಘೋಷಿಸಲ್ಪಟ್ಟಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ದಾಖಲಿಸಿದ್ದಾರೆ.ಒಟ್ಟು 22,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 19,568 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ.88.74 ಆಗಿದೆ. ಸ್ನಾತಕ ವಿಭಾಗದಲ್ಲಿ ಶೇ.87.87 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಶೇ.93.86 ಫಲಿತಾಂಶ ದಾಖಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗಮನ ಸೆಳೆಯುತ್ತಿದೆ.










