ಸುಬ್ರಹ್ಮಣ್ಯ: ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮ ಲಿಂಗ್ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು
ಶ್ರೀಮಂತ ದೇವಸ್ಥಾನಗಳ ವತಿಯಿಂದ ನಡೆಸಲು ಆದ್ಯತೆ ನೀಡಲಾಗುವುದು ಎಂದರು. ಕುಕ್ಕೆ ದೇವಸ್ಥಾನದ ವತಿಯಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು,ಅಭಿವೃದ್ಧಿಯೂ ನಡೆಯುತ್ತಿದೆ ಎಂದರು.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕೆಲಸ ಮಾಡಲಾಗುವುದು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ಆಗಬೇಕೆಂಬ ಬೇಡಿಕೆ ಇದೆ. ಈಗ ಸಮಿತಿ ಇರುವುದರಿಂದ ಮುಂದಿನ ಮೂರು ವರ್ಷದವರೆಗೆ ಪ್ರಾಧಿಕಾರ ಮಾಡುವುದಿಲ್ಲ ಎಂದರು.ಕೇಂದ್ರದ ಪ್ರಸಾದ ಯೋಜನೆಗೆ ರಾಜ್ಯದ 54 ದೇವಸ್ಥಾನಗಳ ಪಟ್ಟಿ ಕಳುಹಿಲಾಗಿದೆ. ಪ್ರಸಾದ ಯೋಜನೆ ದೇಶಾದ್ಯಂತ ನಡೆಲಾಗುತ್ತಿದ್ದು, ಇದರಲ್ಲಿ ರಾಜ್ಯದ ನಾಲ್ಕು ದೇವಸ್ಥಾನಕ್ಕೆ ಅನುದಾನ ಬಂದಿದೆ.

ಜಿಲ್ಲೆಯ ಬಸ್ ಸಮಸ್ಯೆ ಪರಿಹಾರಕ್ಕೆ ಕ್ರಮ:
ಹೊಸ ಬಸ್ ಖರೀದಿಸಲು ಆದ್ಯತೆ ನೀಡಲಾಗುತ್ತಿದ್ದು ಈ ವರ್ಷ ಸುಮಾರು 800 ಬಸ್ ಕೆಎಸ್ಆರ್ಟಿಸಿಗೆ ಬರಲಿದೆ. ಇದರಲ್ಲಿ ದಕ್ಷಿಣ ಕನ್ನಡಕ್ಕೆ ಆದ್ಯತೆ ನೀಡಲಾಗುವುದು.ಮಂಗಳೂರು ವಿಮಾನ ನಿಲ್ದಾಣದಿಂದ ಕುಕ್ಕೆಗೆ ಒಂದೆರಡು ತಿಂಗಳಲ್ಲಿ ಮೂರು ಬಸ್ ಗಳ ವ್ಯವಸ್ಥೆ ಮಾಡಲಾಗುವುದು. ಶಾಲಾ-ಕಾಲೇಜು ಮಕ್ಕಳಿಗೆ ಬಸ್ ನಿಲ್ಲಿಸದೇ ಇದ್ದಲ್ಲಿ ದೂರು ನೀಡಿ ಎಂದು ಸಚಿವರು ಪ್ರಶ್ನೆಗೆ ಉತ್ತರಿಸಿದರು.ಕಡಬಕ್ಕೆ ಬಸ್ ನಿಲ್ದಾಣಕ್ಕೆ ಗುರುತಿಸಲಾದ ಜಾಗಕ್ಕೆ ರಸ್ತೆಗೆ ಜಾಗ ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಮೂಲಕ ಜಾಗ ಮಾಡಿಕೊಳ್ಳಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರಲ್ಲಿ ಸೂಚಿಸಿದರು. ಸುಬ್ರಹ್ಮಣ್ಯಕ್ಕೆ ಕೆಎಸ್ಆರ್ಟಿಸಿ ಡಿಪೋ ಬೇಡಿಕೆ ಇದೆ. ಅದಕ್ಕೆ ಯೇನೆಕಲ್ಲಿನಲ್ಲಿ ಜಾಗ ಗುರುತಿಸಲಾಗಿದ್ದು ಕಂದಾಯ ಸಚಿವರ ಮೂಲಕ ಪರಿಶೀಲನೆ ನಡೆಸಲಾಗುವುದು ಎಂದರು.
ಕುಕ್ಕೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಡಿಕೆ ಇದೆ. ತಕ್ಷಣಕ್ಕೆ ನಮಗೆ ದೇವಸ್ಥಾನದ ಆಸು-ಪಾಸಿನಲ್ಲಿ ಜಾಗ ಕೊಟ್ಟಲ್ಲಿ ೨೪ ಗಂಟೆ ಆರೋಗ್ಯ ಸೇವೆ ನೀಡುವ ಕೇಂದ್ರ ಮಾಡುತ್ತೇವೆ. ಈ ಬಗ್ಗೆ ಆರೋಗ್ಯ ಸಚಿವರಲ್ಲಿ ಮಾತನಾಡುತ್ತೇನೆ. ಸುಬ್ರಹ್ಮಣ್ಯ ಆಸ್ಪತ್ರೆಗೆ ವೈದ್ಯರ, ಸಿಬ್ಬಂದಿ ನೇಮಕದ ಬಗ್ಗೆಯೂ ಆರೋಗ್ಯ ಸಚಿವರಲ್ಲಿ ಮಾತನಾಡುತ್ತೇನೆ ಎಂದರು.