ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯು ವೈಭವದಿಂದ ಜರುಗಿತು. ದೇಶ, ವಿದೇಶಗಳಿಂದ ಆಗಮಿಸಿದ ಲಕ್ಷಾಂತರ ಮಂದಿ ಜಂಬೂ ಸವಾರಿಯನ್ನು ಕಣ್ತುಂಬಿಕೊಂಡರು.ಅರಮನೆ ಹೊರ ಆವರಣದ ಕೋಟೆ ಆಂಜನೇಯ ಗುಡಿಯ ಮುಂದೆ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 1.08ಕ್ಕೆ ಪೂಜೆ ಸಲ್ಲಿಸಿದರು.ಬಳಿಕ, ಸ್ತಬ್ಧಚಿತ್ರ ಮತ್ತು
ಕಲಾತಂಡಗಳ ಮೆರವಣಿಗೆಗೆ ಚಾಲನೆ ದೊರಕಿತು. ಹೆಜ್ಜೆ- ಗೆಜ್ಜೆ, ತಾಳ-ಮೇಳ, ಕಂಸಾಳೆ, ತಮಟೆ-ನಗಾರಿ, ಡೋಲು, ಚಂಡೆಯ ಝಲ್ಲೆನಿಸುವ ನಾದ ನೃತ್ಯಗಳೊಂದಿಗೆ ಸಾವಿರಾರು ಕಲಾವಿದರು ತಮ್ಮ ಜಿಲ್ಲೆಗಳ ಸಾಂಸ್ಕೃತಿಕ ವಿಶೇಷಗಳನ್ನು ಸಂಗೀತ- ನೃತ್ಯದ ಮೂಲಕ ಪ್ರಸ್ತುತಪಡಿಸಿದರು.ಸ್ತಬ್ಧಚಿತ್ರಗಳು ಸರ್ಕಾರದ ಸಾಧನೆಗಳನ್ನು ಅನಾವರಣಗೊಳಿಸಿದವು.ಪೊಲೀಸ್ ಪಡೆ, ಅಶ್ವಾರೋಹಿ ಪಡೆಯೊಂದಿಗೆ ಮೆರವಣಿಗೆ ನಡೆಯಿತು.ಸಂಜೆ 4.40ಕ್ಕೆ ಅಭಿಮನ್ಯು ಆನೆ ಹೊತ್ತಿದ್ದ 750 ಕೆ.ಜಿ.ಯ ಚಿನ್ನದ ಅಂಬಾರಿಯಲ್ಲಿ ಅಲಂಕರಿಸಿ ಇಡಲಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮೈಸೂರು ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಜೊತೆಯಾದರು. ರಾಷ್ಟ್ರಗೀತೆಯ ನಡುವೆ 21 ಸುತ್ತು ಕುಶಾಲತೋಪುಗಳನ್ನು ಸಿಡಿಸಲಾಯಿತು. ಆನೆಗಳೆಲ್ಲವೂ ಏಕಕಾಲಕ್ಕೆ ಸೊಂಡಿಲೆತ್ತಿ ದೇವಿಗೆ ನಮಸ್ಕರಿಸಿದವು. ಎಲ್ಲರೂ ಚಾಮುಂಡೇಶ್ವರಿಗೆ ಜೈಕಾರ ಹಾಕಿದ ಬಳಿಕ ಅಂಬಾರಿಯು ಮುಂದಕ್ಕೆ ಸಾಗಿತು.
ಆರನೇ ಬಾರಿ ಅಂಬಾರಿ ಹೊತ್ತ ಆನೆ ಅಭಿಮನ್ಯುವಿನೊಂದಿಗೆ ಕುಮ್ಕಿ ಆನೆಗಳಾಗಿ ರೂಪಾ, ಕಾವೇರಿ ಹೆಜ್ಜೆ ಹಾಕಿದರೆ,ನಿಶಾನೆ ಆನೆಯಾಗಿ ಧನಂಜಯ ಜವಾಬ್ದಾರಿ ನಿರ್ವಹಿಸಿದ. ನೌಫತ್ ಆನೆಯಾಗಿ ಗೋಪಿ, ಸಾಲಾನೆಗಳಾಗಿ ಏಕಲವ್ಯ, ಮಹೇಂದ್ರ, ಲಕ್ಷ್ಮಿ, ಶ್ರೀಕಂಠ, ಕಂಜನ್, ಭೀಮ, ಹೇಮಾವತಿ, ಸುಗ್ರೀವ, ಪ್ರಶಾಂತ ಹೆಜ್ಜೆ ಹಾಕಿದವು.












