ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರಿಗೆ ಸರಕಾರಿ ಉದ್ಯೋಗ ನೀಡಿ ಸರಕಾರ ಆದೇಶ ನೀಡಿದ್ದು ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ
ಸಹಾಯಕಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿಗೆ ಕರ್ತವ್ಯಕ್ಕೆ ಹಾಜರಾದ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಗೆ ನೇಮಕಾತಿ ಆದೇಶಪತ್ರವನ್ನು ನೀಡಿದರು. ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಆದೇಶ ಹೊರಡಿಸಿದ್ದರು.ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ನೂತನ ಅವರು ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. .ಕಳೆದ ವಾರ ನೂತನಕುಮಾರಿ ಬೆಂಗಳೂರಿಗೆ ತೆರಳಿ ಸಿಎಂ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದರು. ನೇಮಕಾತಿ ಆದೇಶಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಿಎಂ ಸಚಿವಾಲಯಕ್ಕೆ ಸಲ್ಲಿಸಿದ್ದರು. ಇದೀಗ ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.