ಕಡಬ:ಊರಿಗೆ ಬಂದು ಉಪಟಳ ನೀಡಿ, ಜನರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. ಐದು ಸಾಕಾನೆಗಳ ಸಹಕಾರದೊಂದಿಗೆ ಮಂಗಳವಾರ ಬೆಳಿಗ್ಗಿನಿಂದ ಆರಂಭಗೊಂಡ ಅರಣ್ಯ ಇಲಾಖೆಯ ಕಾರ್ಯಾಚರಣೆ ಎರಡನೇ ದಿನವಾದ ಬುಧವಾರವೂ ದಿನಪೂರ್ತಿ ಮುಂದುವರಿದೆ. ಇಂದು ಕಾರ್ಯಾಚರಣೆ ವೇಳೆ ಅರಣ್ಯದಲ್ಲಿ ಅಜಾನ ಎಂಬ ಕಾಡಲ್ಲಿ ಒಂಟಿ ಸಲಗ

ಪತ್ತೆಯಾಗಿತ್ತು.ದುರ್ಗಮ ಪ್ರದೇಶ ಮತ್ತು ಕಡಿದಾದ ಬಲ್ಲೆ ಕಾಡಾದ ಕಾರಣ ಅರಿವಳಿಕೆ ನೀಡಿ ಕಾಡಾನೆಯನ್ನು ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಕಾರ್ಯಾಚರಣೆಯ ತಂಡ ಮತ್ತು ಸಾಕಾನೆಗಳು ಆಗಮಿಸುತ್ತಿದ್ದಂತೆ ತೀವ್ರ ಪ್ರತಿರೋಧ ಒಡ್ಡಿದ ಒಂಟಿ ಸಲಗ ತಪ್ಪಿಸಿಕೊಂಡಿದೆ. ಒಂಟಿ ಸಲಗ ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸುತ್ತಿತ್ತು. ಎರಡು ದಿನ ಕಾರ್ಯಾಚರಣೆ ಪೂರ್ತಿಗೊಂಡಿದೆ. ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ಹಾಗು ಪಂಜ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾಡಾನೆ ಸೆರೆ ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ ಆಗಮಿಸಿದ 5 ಆನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಯುತಿದೆ. ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು,ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸುತಿದೆ. ಬುಧವಾರ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ವೀಕ್ಷಣೆ ನಡೆಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಲಾಗಿದ್ದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ

ಅರಣ್ಯ ಇಲಾಖೆಯ ಅಧಿಕಾರಿ ಹಾಗು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಾಗರಹೊಳೆ ಹಾಗು ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಜೊತೆಯಲ್ಲಿದ್ದಾರೆ.
ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿತ್ತು.