ನವದೆಹಲಿ: ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದ ಸಂಸದರಾಗಿ ಉಳಿದುಕೊಳ್ಳಲಿದ್ದಾರೆ. ಹೀಗಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸೋಮವಾರ ನಡೆದ
ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ ವೇಣು ಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹಾಜರಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ‘ರಾಹುಲ್ ಗಾಂಧಿ ಎರಡು ಲೋಕಸಭಾ ಸ್ಥಾನಗಳಿಂದ ಗೆದ್ದಿದ್ದಾರೆ ಆದರೆ ಕಾನೂನಿನ ಪ್ರಕಾರ ಅವರು ಒಂದನ್ನು ಖಾಲಿ ಮಾಡಬೇಕು. ರಾಹುಲ್ ಗಾಂಧಿ ರಾಯ್ ಬರೇಲಿಯನ್ನು ಉಳಿಸಿಕೊಂಡಿದ್ದಾರೆ. ಹೀಗಾಗಿ ಪ್ರಿಯಾಂಕಾ ಅವರು ವಯನಾಡಿನಿಂದ ಸ್ಪರ್ಧಿಸಲಿದ್ದಾರೆ’ ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ರಾಯ್ಬರೇಲಿ ಮತ್ತು ವಯನಾಡು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಭಾರಿ ಬಹುಮತದಿಂದ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.







