ಸುಳ್ಯ:ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಾದ್ಯಂದ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಮಾಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ
ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಆದೇಶದಲ್ಲಿ ತಿಳಿಸಿದ್ದರು.
ಇದೀಗ ನಿಷೇಧಾಜ್ಞೆ ಜಾರಿ ಮಾಡಿ ಕೆಲವೇ ಗಂಟೆಗಳಲ್ಲಿ ನಿಷೇಧಾಜ್ಞೆ ಹಿಂಪಡೆದು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಮಾಡಬೇಕಾದ ಪರಿಸ್ಥಿತಿ ಇಲ್ಲದ ಕಾರಣ ನಿಷೇಧಾಜ್ಞೆ ಹಿಂಪಡೆಯಲಾಗಿದೆ. ವಿವಿಧ ಕಡೆಗಳಲ್ಲಿ ಪೂಜೆ, ಪುರಸ್ಕಾರಗಳು, ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಕಾರಣ ನಿಷೇಧಾಜ್ಞೆ ಜಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಬಾರದು ಎಂಬ ಹಿನ್ನಲೆಯಲ್ಲಿ ನಿಷೇಧಾಜ್ಞೆ ಹಿಂಪಡೆಯಲಾಗಿದೆ ಎಂದು ತಹಶೀಲ್ದಾರ್ ಎನ್.ಮಂಜುನಾಥ್ ತಿಳಿಸಿದ್ದಾರೆ.












