ಸುಳ್ಯ:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ.ಅರೆಭಾಷೆ ಮಾತನಾಡುವ ಪ್ರತಿಯೊಬ್ಬರೂ ಸಮೀಕ್ಷೆ 2025ರ ಗಣತಿಯ ಪ್ರಪತ್ರದ ಮಾತೃಭಾಷೆ ಕಾಲಂನಲ್ಲಿ 13ನೇ ಸಂಖ್ಯೆಯ ಭಾಷೆಯಾಗಿರುವ ಅರೆಭಾಷೆಯನ್ನು
ಆಯ್ಕೆ ಮಾಡಿ ನಮೂದಿಸಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿದ್ದಾರೆ.
ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು ಜಾಗೃತಿ ಮೂಡಿಸಲು ಸಾಧ್ಯವಿದೆ. ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗುತ್ತದೆ.
ಕರ್ನಾಟಕ ಸರಕಾರವು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಇರುವ ಹತ್ತುಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗಕ್ಕಾಗಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಹುಟ್ಟುಹಾಕಿದೆ. ಹಾಗಾಗಿ ಅರೆಭಾಷೆಯ ಅಸ್ಮಿತೆಗಾಗಿ ಅರೆಭಾಷೆ ಮಾತನಾಡುವ, ತಿಳಿದಿರುವ ಪ್ರತಿಯೊಬ್ಬರೂ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಗಣತಿಯ ಪ್ರಪತ್ರದ ಮಾತೃಭಾಷೆ ಕಾಲಂನಲ್ಲಿ 13ನೇ ಸಂಖ್ಯೆಯ ಭಾಷೆಯಾಗಿರುವ ಅರೆಭಾಷೆಯನ್ನು ಆಯ್ಕೆ ಮಾಡಬೇಕು. ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ.
ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ ಎಂದು ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.












