ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ. ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು
ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದರು. ದ.ಕ. ಜಿಲ್ಲೆ 91.12 ಶೇ. ಫಲಿತಾಂಶ ದಾಖಲಿಸಿದ್ದರೆ, ಉಡುಪಿ ಜಿಲ್ಲೆ 89.96 ಫಲಿತಾಂಶ ದಾಖಲಿಸಿದೆ. ಈ ವರ್ಷ ಒಟ್ಟು ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ವಿದ್ಯಾರ್ಥಿಗಳು ಫಲಿತಾಂಶಗಳನ್ನು ಇಂದು 12:30ರ ನಂತರ kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು.
ಮಾರ್ಚ್ 21ರಿಂದ ಎಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು.