ಮಂಗಳೂರು:ವೆನ್ಲಾಕ್ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೆನ್ಲಾಕ್ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳೊಂದಿಗೆ ಮಾದರಿ ಆಸ್ಪತ್ರೆಯಾಗಿ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲದೆ, ವೆನ್ಲಾಕ್ಗೆ
ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೇ ಸುತ್ತಮುತ್ತಲಿನ ಸುಮಾರು 7-8 ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ಅವಲಂಬಿಸಿಕೊಂಡಿದ್ದಾರೆ. ಆದರೆ ಸಿಬ್ಬಂದಿ ಕೊರತೆ ಸಹಿತ ಕೆಲವು ಸಮಸ್ಯೆಯನ್ನು ಈ ಜಿಲ್ಲಾಸ್ಪತ್ರೆ ಎದುರಿಸುತ್ತಿದ್ದು ಇವುಗಳನ್ನು ನಿವಾರಿಸಿ ಸಮಗ್ರ ಅಭಿವೃದ್ದಿ ಮಾಡುವುದಕ್ಕೆ ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್ನಲ್ಲಿ ವೆನ್ಲಾಕ್ ನ್ನು ಪ್ರಾದೇಶಿಕ(ರಿಜನಲ್) ಆಸ್ಪತ್ರೆಯನ್ನಾಗಿ ಘೋಷಿಸಬೇಕು. ಜೊತೆಗೆ ಆಸ್ಪತ್ರೆಗೆ ಮತ್ತಷ್ಟು ಉನ್ನತ ಸ್ಥಾನಮಾನ ಒದಗಿಸಬೇಕುಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ಪ್ರಾದೇಶಿಕ ಆಸ್ಪತ್ರೆ ಮಾನ್ಯತೆ ನೀಡುವುದರಿಂದ ಹೆಚ್ಚಿನ ಅನುದಾನ, ವೈದ್ಯಕೀಯ ಮೂಲಸೌಕರ್ಯ ಸುಧಾರಿಸುವ ಮೂಲಕ ಹೆಚ್ಚಿನ ಪ್ರದೇಶಕ್ಕೆ ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಅನುಕೂಲವಾಗುತ್ತದೆ. ಈ ಸಂಬಂಧ ಕ್ಯಾ. ಚೌಟ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯನ್ನು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 90 ಕೋಟಿಗೂ ಅಧಿಕ ಮೊತ್ತ ಹಾಗೂ ಎಂ.ಆರ್.ಪಿ.ಎಲ್ ಸೇರಿದಂತೆ ವಿವಿಧ ಸಿಎಸ್ಆರ್ ನಿಧಿಯಡಿ ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ 60 ಕೋಟಿ ಸುಮಾರಿನ ಅನುದಾನದಲ್ಲಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಂಡಿತ್ತು ಹಾಗೂ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದ.ಕ. ಜಿಲ್ಲೆ ಒಟ್ಟು 25.11 ಕೋಟಿ ರೂ. ಬಿಡುಗಡೆಯಾಗಿತ್ತು. ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ನ 2ನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣಕ್ಕೆ 1.11 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇದರ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಘಟಕಗಳು ಕಾರ್ಯಾರಂಭಿಸಿದರೆ ವೆನ್ಲಾಕ್ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಕರಾವಳಿ ಜನತೆಗೆ ದೊರೆಯಲಿದೆ.